ಬೆಂಗಳೂರು, ಜು.- ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರ ಪ್ರದೇಶಕ್ಕೆ ತೆರಳಿದ್ದ ವೇಳೆ ನಗರ ಪೊಲೀಸರ ಕಾರು ಚಿತ್ತೂರಿನ ಬಳಿ ಭೀಕರ ಅಪಘಾತಕ್ಕೀಡಾಗಿ ಪಿಎಸ್ಐ, ಕಾನ್ಸ್ಟೇಬಲ್ ಸೇರಿ ಮೂವರು ಮೃತಪಟ್ಟರೆ,ಕೊಪ್ಪಳ ಜಿಲ್ಲೆಯ ಕುಕನೂರಿನ ಭಾನಾಪೂರದ ಬಳಿ ಲಾರಿ ಸ್ಕಾರ್ಪಿಯೋ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಐವರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ.
ಶಿವಾಜಿನಗರ ಪೊಲೀಸರ ಕಾರು ಚಿತ್ತೂರಿನ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಭೀಕರ ಅಪಘಾತಗೊಂಡು ಶಿವಾಜಿನಗರ ಠಾಣೆಯ ಪಿಎಸ್ಐ ಅವಿನಾಶ್ (29) ಕಾನ್ಸ್ಟೆಬಲ್ ಅನಿಲ್ ಮುಲಿಕ್ (26) ಹಾಗೂ ಖಾಸಗಿಕ್ಯಾಬ್ ಚಾಲಕ ಜೋಸೆಫ್ ಮೃತಪಟ್ಟಿದ್ದಾರೆ.ಪಿಎಸ್ಐ ಅವಿನಾಶ್ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಚಿಕ್ಕಳಕೆರೆ ಗ್ರಾಮದವರು. ಕಾನ್ಸ್ಟೆಬಲ್ಅನಿಲ್ ಮುಲಿಕ್ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ರೋಲವಾಡಿಗ್ರಾಮದವರಾಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರೊಬೆಷನರಿ ಪಿಎಸ್ಐ ದೀಕ್ಷಿತ್ ಕಾನ್ಸ್ಟೆಬಲ್ ಶರಣಬಸವ ಅವರನ್ನು ವೆಲ್ಲೂರಿನ ಸಿಎಂಸಿಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಕೊಡಿಸಲಾಗುತ್ತಿದ್ದು ಇಬ್ಬರು ಸ್ಥಿತಿ ಗಂಭೀರವಾಗಿದೆ.ಚಿತ್ತೂರಿನ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಅಪಘಾತ ನಡೆದಿದೆ. ಚಿತ್ತೂರಿನಿಂದ ತಿರುಮಲಕ್ಕೆ ಹೋಗುವ ರಸ್ತೆಯ ನಡುವೆ ಈ ಸೇತುವೆ ಬರುತ್ತದೆ. ಪೊಲೀಸ್ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ ದೂರದ ಮತ್ತೊಂದು ರಸ್ತೆಗೆ ಹಾರಿಹೋಗಿ ಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಸಬ್ ಇನ್ಸ್ಪೆಕ್ಟರ್ ಅವಿನಾಶ್, ಪ್ರೊಬೆಷನರಿ ಪಿಎಸ್ಐ ದೀಕ್ಷಿತ್, ಪೊಲೀಸ್ ಕಾನ್ಸ್ಟೆಬಲ್ ಅನಿಲ್ ಸೇರಿ ಆರು ಮಂದಿಯ ತಂಡವು ಖಾಸಗಿ ಟ್ರಾವೆಲ್ಸ್ನಿಂದ ಇನೊವಾ ಕಾರನ್ನು ಬಾಡಿಗೆ ಪಡೆದು ಗಾಂಜಾಗ್ಯಾಂಗ್ಹಿಡಿಯಲು ಆಂಧ್ರಕ್ಕೆ ತೆರಳಿದ್ದಾಗ ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ.ಚಿತ್ತೂರಿನ ಬಳಿ ಆರೋಪಿಗಳು ಇರುವ ಬಗ್ಗೆ ತಂಡ ಮಾಹಿತಿ ಹೊಂದಿತ್ತು. ಹೀಗಾಗಿ ಅವರನ್ನು ಹಿಡಿಯಲು ಖಾಸಗಿ ಇನೋವಾ ಕಾರಲ್ಲಿ ತೆರಳಿದ್ದರು. ಆರೋಪಿ ಚಿತ್ತೂರಿನಲ್ಲಿ ಸಿಗದ ಹಿನ್ನೆಲೆಯಲ್ಲಿ ಹುಡುಕಾಟಕ್ಕಾಗಿ ಇನ್ನೊಂದು ಕಡೆಗೆ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದಿರುವ ಶಿವಾಜಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪುಲಿಕೇಶಿನಗರದ ಎಸಿಪಿ ಅಬ್ದುಲ್ ಕೂಡ ಘಟನಾ ಸ್ಥಳಕ್ಕೆ ತೆರಳಿದ್ದಾರೆ.