

ಆ. 05ರಂದು ಮಂಗಳೂರಿನ ಕೆಪಿಎಸ್ನಲ್ಲಿ ವಲಯ ಮಟ್ಟದ ಕ್ರೀಡಾಕೂಟ: 9 ಶಾಲೆಗಳ 400ಕ್ಕೂ ಅಧಿಕ ಕ್ರೀಡಾಪಟುಗಳ ಭಾಗಿ
ಕುಕನೂರ, ಆ. 04: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮನ್ವಯಾಧಿಕಾರಿಗಳ ಸಹಯೋಗದಲ್ಲಿ ಕುಕನೂರು ತಾಲೂಕಿನ ಮಂಗಳೂರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಆವರಣದಲ್ಲಿ ಆಗಸ್ಟ್ 05ರಂದು ವಲಯ ಮಟ್ಟದ ಕ್ರೀಡಾಕೂಟಗಳು ನಡೆಯಲಿವೆ.
ಈ ಕ್ರೀಡಾಕೂಟದಲ್ಲಿ ಮಂಗಳೂರು, ರೇವಣಕಿ, ಹಿರೇಬಿಡನಾಳ, ಕುದರಿಮೋತಿ, ನೆಲಜೇರಿ ಹಾಗೂ ವಟಪರವಿ ಗ್ರಾಮಗಳ ವ್ಯಾಪ್ತಿಯ ಒಟ್ಟು 9 ಶಾಲೆಗಳ ಸುಮಾರು 400ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶರಣಪ್ಪ ಅರಕೇರಿ ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಖೋ-ಖೋ, ಕಬಡ್ಡಿ, ವಾಲಿಬಾಲ್ ಹಾಗೂ ತ್ರೋಬಾಲ್ ಸ್ಪರ್ಧೆಗಳು ನಡೆಯಲಿದ್ದು, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಸೋಲು-ಗೆಲುವನ್ನು ಸಮಾನ ಮನೋಭಾವದಿಂದ ಸ್ವೀಕರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ನೌಕರರ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಗ್ರಾಮದ ಮುಖಂಡರು, ಕ್ರೀಡಾಪ್ರೇಮಿಗಳು, ಜನಪ್ರತಿನಿಧಿಗಳು, ಶಿಕ್ಷಣಪ್ರೇಮಿಗಳು, ಸಮಾಜಸೇವಕರು, ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ರೈತಪರ ಹೋರಾಟಗಾರರು, ಪತ್ರಕರ್ತ ಮಿತ್ರರು ಹಾಗೂ ಕಾರ್ಯಕ್ರಮಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಕೆಪಿಎಸ್ ಎಸ್ಡಿಎಂಸಿ ಅಧ್ಯಕ್ಷ ಅನಿಲ್ ಕುಮಾರ್ ಎಂ. ಕಲ್ಭಾವಿ, ಎಸ್ಡಿಎಂಸಿ ಸದಸ್ಯರು ಹಾಗೂ ಕೆಪಿಎಸ್ ಆಡಳಿತ ಮಂಡಳಿ ಮನವಿ ಮಾಡಿದ್ದಾರೆ.
ವರದಿಗ: ಚನ್ನಯ್ಯ ಹಿರೇಮಠ, ಕುಕನೂರು



