

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಸೋಮಶೇಖರಗೌಡ ಪಾಟೀಲ

ಸೋಂಪುರದಲ್ಲಿ ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಕುಕನೂರು: ತಾಲೂಕಿನ ಸೋಂಪುರ ಗ್ರಾಮದ ಶರಣಬಸವೇಶ್ವರ ಪ್ರೌಢಶಾಲೆಯಲ್ಲಿ ಮಂಗಳವಾರ ವಲಯಮಟ್ಟದ ಕ್ರೀಡಾಕೂಟವನ್ನು ಉತ್ಸಾಹದಿಂದ ಆಯೋಜಿಸಲಾಯಿತು. ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ಸೋಮಶೇಖರ ಗೌಡ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆದು ಬರುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
*ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ: ಟಿ.ಜಿ. ದಾನಿ*
ಕ್ರೀಡಾಕೂಟದ ಧ್ವಜಾರೋಹಣ ಹಾಗೂ ಉದ್ಘಾಟನೆಯನ್ನು ಅಕ್ಷರ ದಾಸೋಹ ತಾಲೂಕು ಅಧಿಕಾರಿ ಟಿ.ಜಿ. ದಾನಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ. ಕ್ರೀಡಾಕೂಟದಲ್ಲಿ ಸೋಲು-ಗೆಲುವಿಗಿಂತ ಕ್ರೀಡಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆ, ತಾಲೂಕು ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಯಲಬುರ್ಗಾ ದೈಹಿಕ ಶಿಕ್ಷಣ ಪರಿವೀಕ್ಷಕ ಶರಣಪ್ಪ ವೀರಾಪುರ, ಕೆ.ಬಿ. ನಾಯ್ಕರ್, ಶರಣಪ್ಪ ಕೋಳೂರು, ಪ್ರೌಢಶಾಲಾ ಶಿಕ್ಷಕರ ಸಂಘ ಕುಕನೂರಿನ ಸುರೇಶ ಅಬ್ಬಿಗೇರಿ, ರಂಗಪ್ಪ ವಾಲಿಕಾರ್, ಶರಣಪ್ಪ ಬಿಸರಹಳ್ಳಿ, ಹಳೆ ವಿದ್ಯಾರ್ಥಿ ಬಸವರಾಜ ಮಾಸ್ಕಟ್ಟಿ, ಮುಖ್ಯೋಪಾಧ್ಯಾಯ ಆರ್.ಬಿ. ಅಭಿಗಿರಿ,ಹನುಮಂತ ಗೌಡ ದಾದ್ಮಿ, ಚಂದ್ರಶೇಖರ ರಾಜೂರು, ಉಮೇಶ್ ಕಂಬಳಿ, ಎಸ್ ಎಂ ಹಿರೇಮಠ, ಸೋಂಪುರ ಗ್ರಾಮದ ಹಿರಿಯರು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ನಾಗರಾಜ ಉಮಚಗಿ ಶಿಕ್ಷಕರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ವರದಿ ಚನ್ನಯ್ಯ ಹಿರೇಮಠ ಕುಕನೂರು




